ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡುವ ಶ್ರೀಮತಿ ಟಿ. ವಿಮಲಾ ವಿ. ಪೈ ಪ್ರಾಯೋಜಿತ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ಯ ಆಯ್ಕೆ ಸಮಿತಿಯು 2024ನೇ ಸಾಲಿನ ಪ್ರಶಸ್ತಿಗೆ ನಾಡೋಜ ಪ್ರೊ. ಹಂ.ಪ. ನಾಗರಾಜಯ್ಯರವರನ್ನು ಸೂಚಿಸಿದೆ. ಆಯ್ಕೆ ಸಮಿತಿಯ ಸದಸ್ಯರಾದ ಡಾ. ತಾಳ್ತಜೆ ವಸಂತ ಕುಮಾರ್, ಡಾ. ಕೆ. ಚಿನ್ನಪ್ಪ ಗೌಡ, ಡಾ. ಪ್ರಭಾಕರ ಜೋಶಿ, ಡಾ. ಕಿಶೋರಿ ನಾಯಕ್, ಡಾ. ಎಸ್.ವಿ. ಪಾಡೀಗಾರ್ ಸಹಕರಿಸಿದ್ದಾರೆ. ಈ ಪ್ರಶಸ್ತಿಯನ್ನು ಶ್ರೀ ಟಿ.ವಿ. ಮೋಹನ್ದಾಸ್ ಪೈಯವರು ಸ್ಥಾಪಿಸಿದ್ದು, ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ದಿನಾಂಕ 23 ಮಾರ್ಚ್ 2025ರಂದು ಗೋವಿಂದ ಪೈ ಸಂಶೋಧನಾ ಸಂಪುಟದ ದ್ವಿತೀಯ ಭಾಗದ ಲೋಕಾರ್ಪಣೆ ಕಾರ್ಯಕ್ರಮದೊಂದಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
ಹಂಪನಾ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಹಂ.ಪ. ನಾಗರಾಜಯ್ಯರವರು, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರು ತಾಲೂಕಿನ ಹಂಪಸಂದ್ರ ಹಳ್ಳಿಯಲ್ಲಿ ಪದ್ಮಾವತಮ್ಮ- ಪದ್ಮನಾಭಯ್ಯ ದಂಪತಿಗಳ ಮಗನಾಗಿ ಜನಿಸಿದರು. ಹಂಪಸಂದ್ರ, ಗೌರೀಬಿದನೂರು, ಮಂಡ್ಯ, ಮಧುಗಿರಿ ಶಾಲೆಗಳಲ್ಲಿ ಆರಂಭಿಕ ಶಿಕ್ಷಣವನ್ನು ಪಡೆದ ಹಂಪನಾ ತುಮಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಟರ್ ಮೀಡಿಯೆಟ್ ಶಿಕ್ಷಣ ಪೂರೈಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಎಂ.ಎ., ಸ್ನಾತಕೋತ್ತರ ಪದವಿ ಪಡೆದರು. ವಿದ್ವಾಂಸರಾದ ರಂ.ಶ್ರೀ. ಮುಗಳಿಯವರ ಮಾರ್ಗದರ್ಶನದಲ್ಲಿ “ವಡ್ಡಾರಾಧನೆ : ಸಮಗ್ರ ಅಧ್ಯಯನ” ಎಂಬ ವಿಷಯವಾಗಿ ಸಂಶೋಧನ ಪ್ರಬಂಧವನ್ನು ಬರೆದು ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದಿದ್ದಾರೆ.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಇವರು ಮಂಡ್ಯ, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸಿದರು. ಬೆಂಗಳೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿ, ನಿರ್ದೇಶಕರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟಿನ ಸದಸ್ಯರಾಗಿ, ಕನ್ನಡ-ಸಂಸ್ಕೃತಿ ಇಲಾಖೆ ಹಾಗೂ ಜೈನ ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿ ನಾಡುನುಡಿಯ ಮುನ್ನಡೆಗಾಗಿ ಅಪಾರ ಸೇವೆ ಸಲ್ಲಿಸಿದರು.
ಹಂ.ಪ.ನಾ. ಸವ್ಯಸಾಚಿ ಲೇಖಕರು. ಶ್ರೀಯುತರು ನೂರಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ರಚಿಸಿದ್ದಾರೆ. ಭಾಷಾವಿಜ್ಞಾನ, ಜನಪದ, ಅನುವಾದ, ಕಾದಂಬರಿ, ಪ್ರಬಂಧ, ಶಿಶುಸಾಹಿತ್ಯ, ಕಾವ್ಯ, ವಿಮರ್ಶೆ, ಜೀವನಚರಿತ್ರೆ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಅವರ ‘ಚಾರುವಸಂತ’ ಮಹಾಕಾವ್ಯ ದೇಸಿ ಮತ್ತು ಜಾನಪದೀಯ ನೆಲೆಗಳಲ್ಲಿ ರೂಪಿತವಾಗಿದ್ದು, ರಾಷ್ಟ್ರೀಯ ಖ್ಯಾತಿ ಗಳಿಸಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಚಾರ ಸಂಕಿರಣ, ಕಮ್ಮಟ ಕಾರ್ಯಾಗಾರಗಳಲ್ಲಿ ಪ್ರಬಂಧ ಮಂಡಿಸಿರುವ ಇವರು ಕನ್ನಡ ಕಟ್ಟುವ ಕಾಯಕದಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡವರು.
ಹಂಪನಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಿಶುಸಾಹಿತ್ಯ ರಾಷ್ಟ್ರೀಯ ಪ್ರಶಸ್ತಿ, ಚಾವುಂಡರಾಯ ಪುರಸ್ಕಾರ, ಕಾವ್ಯಾನಂದ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಗೌರವ ಡಾಕ್ಟರೇಟ್, ಸೇಡಿಯಾಪು, ಮುಧೋಳದ ರನ್ನಕವಿ ಮೊದಲಾದ ಹಲವಾರು ಪ್ರಶಸ್ತಿಗಳೊಂದಿಗೆ ಜ್ಯೂಯೆಲ್ ಆಫ್ ಜೈನ ವರ್ಲ್ಡ (ಜೈನಲೋಕದ ರತ್ನ) ಎಂಬ ಅಂತರ ರಾಷ್ಟ್ರೀಯ ಪುರಸ್ಕಾರಕ್ಕೂ ಭಾಜನರಾಗಿದ್ದಾರೆ.