Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದ್ಯಾಗಿರಿಯಲ್ಲಿ ಆಳ್ವಾಸ್ ದೀಪಾವಳಿ
    Cultural

    ವಿದ್ಯಾಗಿರಿಯಲ್ಲಿ ಆಳ್ವಾಸ್ ದೀಪಾವಳಿ

    November 11, 2024Updated:January 7, 2025No Comments4 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ವಿದ್ಯಾಗಿರಿ: ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾಗಿ ಅರಳಿದ ಆಳ್ವಾಸ್ ಅಂಗಣದಲ್ಲಿ ದಿನಾಂಕ 04 ನವೆಂಬರ್ 2024ರ ಗುರುವಾರ ಬೆಳಕಿನ ಸಂಭ್ರಮ. ಬಾನಂಗಳದಲ್ಲೂ ಮೂಡಿದ ಚಿತ್ತಾರ. ಅದು ಅಕ್ಷರಶಃ ದೇಶದ ಉತ್ಸವ, ನಾಡಿನ ಹಬ್ಬ, ತುಳುನಾಡಿನ ಪರ್ಬ, ಬೆಳಗುವ ಬೆರಗು ‘ಆಳ್ವಾಸ್ ದೀಪಾವಳಿ’ಯ ಸೊಬಗು. ಸರ್ವಧರ್ಮಗಳ ಸಮಭಾವ, ಭಾರತೀಯತೆಯ ಭ್ರಾತೃತ್ವ, ಸೌಹಾರ್ದತೆಯ ಸಮಗ್ರತೆ ಎಂಬಂತೆ ಸರ್ವ ಹಬ್ಬಗಳನ್ನು ಆಚರಿಸಿಕೊಂಡು ಬಂದಿರುವ  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಗುರುವಾರ ಸಂಜೆ ಇಲ್ಲಿನ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲುರಂಗ ಮಂದಿರದಲ್ಲಿ ‘ಆಳ್ವಾಸ್ ದೀಪಾವಳಿ-2024’ ಆಚರಿಸಿತು. 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ಪೋಷಕರು, ಸ್ಥಳೀಯರು ಸೇರಿ 20 ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ದೀಪಾವಳಿಯ ಬೆಳಕು ಲೋಕ ಬೆಳಗಿತು.
    ಕೊಂಬು, ಕಹಳೆ, 36 ಛತ್ರಿ ಚಾಮರದ ಜೊತೆ, 100 ಕ್ಕೂ ಅಧಿಕ ದೇವಕನ್ಯೆಯರು, ದೀಪ, ಕಳಶ ಹಿಡಿದ ಬಾಲಿಕೆಯರು ಹಾಗೂ ಪುಟಾಣಿಗಳ ಜೊತೆ ಬಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಮೆರವಣಿಗೆ ಮೂಲಕ ಸಭಾಂಗಣವನ್ನು ಪ್ರವೇಶಿಸಿದರು. ಸಾಂಪ್ರದಾಯಿಕ ಮೆರವಣಿಗೆಯಿಂದ ಸಭಾಂಗಣವು ನಂದನವನದಂತೆ, ಇಂದ್ರನ ಆಸ್ಥಾನದಂತೆ ಕಂಗೊಳಿಸಿತು.
    ಆಳ್ವಾಸ್ ಅಂಗಣದಲ್ಲಿ ಮುಸ್ಸಂಜೆಯ ಹೊಂಗಿರಣವು ಮುತ್ತಿಕ್ಕುತ್ತಿದ್ದಂತೆ, ಸೇರಿದ್ದ ವಿದ್ಯಾರ್ಥಿ ಸಾಗರವು ಪೋಣಿಸಿದ ಮುತ್ತುಗಳಂತೆ ಕಣ್ಮನ ಸೆಳೆದರು. ಶುಭ ಸೂಚಕವಾದ ನೆಲದ ಮೂಲ ನಿವಾಸಿಗಳ ಕೊಳಲು, ಡೋಲು ಹಾಗೂ ಚೆಂಡೆ ನಿನಾದವು ಸಂಜೆಯ ರಂಗೇರಿಸಿತು.
    ಮೂರು ನೂರಕ್ಕೂ ಹೆಚ್ಚು  ಲಂಗ ದಾವಣಿ ತೊಟ್ಟು ಮಲ್ಲಿಗೆ ಮುಡಿದ ಬಾಲಕಿಯರು, ಪುಟಾಣಿಗಳು ಒಟ್ಟು ವೇದಿಕೆಯ ಮೆರುಗು  ಹೆಚ್ಚಿಸಿದರು. ತುಳುನಾಡಿನ ಕೃಷಿ ಪ್ರಧಾನವಾದ ದೀಪಾವಳಿ ಹಬ್ಬದ ಆಚರಣೆ ಮಾದರಿಯಲ್ಲಿ ಮೊದಲಿಗೆ ಗೋ ಪೂಜೆ ನಡೆಯಿತು. ಅವಲಕ್ಕಿ, ಬೆಲ್ಲ, ಭತ್ತ, ನೀರ್ ದೋಸೆ, ಬಾಳೆ ಹಣ್ಣು ನೀಡಿ ಗೋವನ್ನು ಸತ್ಕರಿಸಲಾಯಿತು. ಆರತಿ ಬೆಳಗಿ ಆರಾಧಿಸಲಾಯಿತು. ಬಳಿಕ ವೇದಿಕೆ ಮುಂಭಾಗದಲ್ಲಿಯೇ ತುಳಸಿ ಪೂಜೆ ನಡೆಯಿತು. ಕದಿರು ಕಟ್ಟಿ ಮನೆ ತುಂಬಿಸುವ ಸಮೃದ್ಧಿಯನ್ನು ಆಶಿಸಲಾಯಿತು.
    ಕಳಸೆ, ನೇಗಿಲು, ನೊಗ,  ಮುಡಿ ಕಟ್ಟುವ ಕೊದಂಟಿ ಸೇರಿದಂತೆ ಸಮಗ್ರ ಕೃಷಿ ಪರಿಕರಗಳು, ಹಣ್ಣು ಹಂಪಲು, ಕರಾವಳಿಯ ಗದ್ದೆಯ ನಾಟಿಯ ತರಕಾರಿ ಬೆಳೆಗಳು, ದವಸ ಧಾನ್ಯಗಳ ಪೂಜೆಯ ಮೂಲಕ ‘ಸಿರಿ – ಸಂಪತ್ತು -ಸಮೃದ್ಧಿ’ಯನ್ನು ನಾಡಿಗೆ ಹರಸಲಾಯಿತು. ನಂತರದ ದೇವಾರಾಧನೆಯಲ್ಲಿ ವಿಘ್ನ ನಿವಾರಕ ಗಣಪತಿ, ವಿದ್ಯಾ ಅಧಿಪತಿ ಸರಸ್ವತಿ, ಸಂಪತ್ತಿನ ದೇವಿ ಲಕ್ಷ್ಮೀ, ಮರ್ಯಾದಾ ಪುರುಷೋತ್ತಮ ಶ್ರೀರಾಮ ಹಾಗೂ ಜೀವನೋಲ್ಲಾಸದ ಪ್ರತೀಕ ಶ್ರೀಕೃಷ್ಣ ದೇವರ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.  ದೀಪಾರಾಧನೆ ಮಾಡಿ ಪೂಜಿಸಲಾಯಿತು.
    ಪಾತಾಳಕ್ಕೆ ತೆರಳಿದರೂ ಮತ್ತೆ ಮತ್ತೆ ತನ್ನ ಸಾಮ್ರಾಜ್ಯಕ್ಕೆ ಚಿತ್ತೈಸುವಂತೆ ಬಲಿಯೇಂದ್ರ ಚಕ್ರವರ್ತಿಯನ್ನು ಆರಾಧಿಸಿ ತುಳುವರು ಕರೆಯುತ್ತಾರೆ. ಕೃಷಿ ಮೂಲಕ ತನ್ನ ಸಾಮ್ರಾಜ್ಯವನ್ನು ಸ್ವರ್ಗ ಮಾಡಿದ ಬಲಿಯೇಂದ್ರ ಚಕ್ರವರ್ತಿಯನ್ನು ಆಹ್ವಾನಿಸಲಾಯಿತು. ತುಳು ಸಂಸ್ಕೃತಿಯಂತೆ ಹಾಲೆ (ಪಾಳೆ) ಅಥವಾ ಸರ್ವಪರ್ಣಿಕ ಮರದ ಬಲಿಯೇಂದ್ರ ಕಂಬದ ದೀಪ ಪ್ರಜ್ವಲಿಸುವ ಮೂಲಕ ಡಾ. ಎಂ .ಮೋಹನ ಆಳ್ವ ಅವರು ನಾಡಿನ ಸಮೃದ್ಧಿಯನ್ನು ಪ್ರಾರ್ಥಿಸಿದರು.  ತುಳುನಾಡು ಸೇರಿದಂತೆ ಕರಾವಳಿ ನಂಬಿಕೆಯಾದ ಬಲಿಯೇಂದ್ರ ಪೂಜೆ ನಡೆಯಿತು.
    ಬಳಿಕ ಮಾತನಾಡಿದ ಡಾ. ಎಂ. ಮೋಹನ ಆಳ್ವ “ವಿಶ್ವದ ಮೂರು ಪ್ರಮುಖ ಹಬ್ಬಗಳು ಕ್ರಿಸ್ಮಸ್, ರಮ್ಜಾನ್ ಹಾಗೂ ದೀಪಾವಳಿ. ಈ ಪೈಕಿ ದೀಪಾವಳಿ ಸರ್ವಧರ್ಮೀಯರ ಹಬ್ಬವಾಗಿ ಪರಿವರ್ತನೆಗೊಂಡಿದೆ. ಎಲ್ಲರ ಅಂತರಂಗದ ಬೆಳಕು ಬೆಳಗಿ  ಭಾವನೆ, ಜವಾಬ್ದಾರಿ ಹಾಗೂ ಕರ್ತವ್ಯದಲ್ಲಿ ನಾವು ಬೆಳಗಬೇಕು. ಕರ್ತವ್ಯ ಎಂಬ ಬತ್ತಿ, ಜ್ಞಾನ ಎಂಬ ಎಣ್ಣೆ ಹಾಗೂ ಹಣತೆ ಎಂಬ ಶಿಕ್ಷಣ ಸಂಸ್ಥೆ ಇದ್ದಾಗ ವಿದ್ಯಾರ್ಥಿಗಳ ಬದುಕು ಬೆಳಗಲು ಸಾಧ್ಯ. ಪ್ರತಿದಿನವೂ ದೀಪಾವಳಿ. ಆದರೆ,  ಒಳಿತನ್ನು ಆಯ್ಕೆ ಮಾಡುವ ಸಾಮರ್ಥ್ಯ ನಿಮ್ಮದಾಗಬೇಕು. ಸಂಬಂಧಗಳೇ ಸಂಪತ್ತು. ಆ ಸಂಪತ್ತಿಗೆ ಸಾವು ಇಲ್ಲ. ಆರ್ಥಿಕ ಸಂಪತ್ತು ಸಂಬಂಧಕ್ಕೆ ಕಾರಣ ಆಗಬಾರದು. ಅಜ್ಞಾನ ಹಾಗೂ ಅಂಧಕಾರ ತೊಡೆದು ದೀಪ ಹಚ್ಚೋಣ. ಜಾತಿ ಧರ್ಮ, ಕುಲ ಮತ ಎನ್ನದೇ ಸಂಬಂಧ ಬೆಳಗೋಣ. ಎಲ್ಲರೂ ಒಂದಾಗಿ ಬೆಳೆಯೋಣ. ‘ಹಣತೆ ಹಚ್ಚುತ್ತೇನೆ ನಾನು ಅಹಂಕಾರದಿಂದಲ್ಲ. ಪರಸ್ಪರ ಮುಖ ನೋಡುವ ಸಡಗರದಿಂದ’.” ಎಂಬ ಕವಿವಾಣಿಗಳನ್ನು  ಅವರು ಉಲ್ಲೇಖಿಸಿದರು. ಆರಾಧನೆಯ ಬಳಿಕ ಆಚರಣೆಯ ಭಾಗವಾಗಿ ದೀಪಾವಳಿಯ ಸಂಭ್ರಮದ ವೇದಿಕೆಯಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಮೇಳೈಸಿತು.
     ಪುತ್ತೂರಿನ ವಿದ್ವಾನ್ ದೀಪಕ್ ಕುಮಾರ್ ನಿರ್ದೇಶನದಲ್ಲಿ ಮೂಡಿಬಂದ ನೀಲಕಂಠನ ಆರಾಧನೆಯ ‘ಭೋ ಶಂಭೋ, ಶಿವ ಶಂಭೋ, ಸ್ವಯಂ ಭೋ’ ಶಾಸ್ತ್ರೀಯ ನೃತ್ಯದ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಅನಂತರ ಕೃಷ್ಣ -ರಾಧೆಯರ ಮೋಹಕತೆ. ನವರಾತ್ರಿಯ ನವದುರ್ಗೆಯ ಆರಾಧನೆ ಸಂದರ್ಭದಲ್ಲಿ ಗುಜರಾತಿನಲ್ಲಿ ನರ್ತಿಸುವ  ಗಾರ್ಭ ಮತ್ತು ದಾಂಡಿಯಾದ ನೃತ್ಯ. ರಾಧಾ-ಶ್ಯಾಮ ನರ್ತನವು ವಿದ್ಯಾರ್ಥಿ ಸಾಗರದ ನಡುವೆ ಪ್ರೀತಿಯ ಅಲೆ ಸೃಷ್ಟಿಸಿತು.
    ಮಂಟಪ ಪ್ರಭಾಕರ ಮತ್ತು ವಿದ್ವಾನ್ ಚಂದ್ರಶೇಖರ ನಾವುಡ ನಿರ್ದೇಶನದಲ್ಲಿ ಮೂಡಿಬಂದ ‘ಬಡಗುತಿಟ್ಟು ಯಕ್ಷಗಾನ ರಾಸಲೀಲೆ’ ಯಕ್ಷ ರೂಪಕವು ಕೃಷ್ಣನ ಯದುಕುಲ ಲೋಕ ಕರಾವಳಿಯಲ್ಲಿ ಅವತರಿಸಿದಂತೆ ಭಾಸವಾಯಿತು. ‘ಕೊಳಲನೂದುತ ಬಂದ ಕೃಷ್ಣ’ ಮಕ್ಕಳ ನೃತ್ಯ ಗೋಕುಲವನ್ನೇ ಸೃಷ್ಟಿಸಿತು. ಭಾರತೀಯ ಮಾರ್ಷಲ್ ಕಲಾ ಮಾದರಿಯ ಮಣಿಪುರಿ ಸ್ಟಿಕ್ ಡ್ಯಾನ್ಸ್ ಈಶಾನ್ಯ ಭಾರತದ ಸಾಹಸದ ದರ್ಶನ ನೀಡಿತು. ಒಬ್ಬರ ಮೇಲೆ ಮತ್ತೊಬ್ಬರು ಏರಿ ನಿರ್ಮಿಸಿದ ಪಿರಮಿಡ್, ಜಿಗಿತ, ಬಾಯಿಗಿರಿಸಿದ ಚೂರಿ, ಅಗ್ನಿಯ ಆಟ ರೋಮಾಂಚನಗೊಳಿಸಿತು.
    ಈಶಾನ್ಯದ ಬಳಿಕ ಭಾರತದ ದಕ್ಷಿಣಕ್ಕೆ ಹೊರಳಿದ ವೇದಿಕೆಯು ಕೇರಳದ ಚೆಂಡೆ ಹಾಗೂ ತಾಳದ ನಾದಕ್ಕೆ ಕಿವಿಯಾಯಿತು. ನಾದದ ಜೊತೆಗೆ ಚೆಂಡೆ ಹಾಗೂ ತಾಳ ವಾದಕರು ಹೆಜ್ಜೆ ಹಾಕಿದರು. ಬಸವರಾಜ್ ಹಾಗೂ ಚೇತನ್ ತರಬೇತಿಯಲ್ಲಿ ಮೂಡಿ ಬಂದ ಮಲ್ಲಕಂಬ ಮತ್ತು ರೋಪ್ ಕಸರತ್ತು ಕಲಾಕ್ರೀಡೆಯಾಗಿ ಮೆರಗು ನೀಡಿತು. ಪಾಶ್ಚಾತ್ಯ, ಭಾರತೀಯ, ಕಸರತ್ತುಗಳ ಮಿಶ್ರಣದಂತೆ ಸಂಕಲಿಸಿದ ಸೃಜನಾತ್ಮಕ ನೃತ್ಯ ಹೊಸ ಲೋಕಕ್ಕೆ ಕೊಂಡೊಯ್ಯಿತು.
    ಕರ್ನಾಟಕದ ದೇಸಿ ಕಲೆಯಾದ ಡೊಳ್ಳು ಕುಣಿತವನ್ನು ಆಳ್ವಾಸ್ ಇದರ ತಾಂತ್ರಿಕ ವಿದ್ಯಾರ್ಥಿಗಳು ಪ್ರದರ್ಶಿಸಿದಾಗ ಪ್ರೇಕ್ಷಕ ವರ್ಗವೇ ಧ್ವನಿಯಾಯಿತು. ಹುಡುಗ- ಹುಡುಗಿಯರ ಸ್ಪರ್ಧೆಯೇ ಏರ್ಪಟ್ಟು, ಕನ್ನಡ ಧ್ವಜ ಹಾರಾಡಿತು. ಅಖಿಲ ಪರಿಮಳನ್ ನಿರ್ದೇಶನದ ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ ‘ಭೂಮಿ’ ನೃತ್ಯ ಪ್ರಕಾರವು ದ್ವೀಪ ದೇಶದ ಚಮತ್ಕಾರದ ಶಕ್ತಿಯೆಡೆಗೆ ಕೊಂಡೊಯ್ಯಿತು. ತಿರುಗುವ ಚಕ್ರ, ಹಾರುವ ಬೆಂಕಿ ಉಂಡೆ ಇತ್ಯಾದಿಗಳು ಸೊಬಗೇರಿಸಿದವು.
    ಆಶಿಂಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರ ಕಥಕ್ ‘ವರ್ಷಧಾರೆ’ಯನ್ನೇ ಸುರಿಸಿತು. ತುಂತುರು ಮಳೆಯನ್ನು ಸಂಭ್ರಮಿಸುವ ಋತುವಿನ ದರ್ಶನ ನೀಡಿತು.
    ಕೊನೆಯಲ್ಲಿ  ವೇದಿಕೆಯಲ್ಲಿ  ಗೊಂಬೆ ವಿನೋದಾವಳಿ ನೃತ್ಯ  ರಂಗೇರಿದರೆ, ಆಗಸದಲ್ಲಿ ಸಿಡಿಮದ್ದು ಚಿತ್ತಾರ ಮೂಡಿಸಿತು. ಬೆಳಕಿನ ಜೊತೆ ಗೊಂಬೆಗಳು ಅಂದ ಹೆಚ್ಚಿಸಿದವು. ಕುಲದಲ್ಲಿ  ಕೀಳ್ಯಾವುದೋ… ತಂದನಾನಿ ಹಾಡಿನೊಂದಿಗೆ ತೆರೆಬಿತ್ತು.
    ಶಾಸಕ ಉಮಾನಾಥ ಕೋಟ್ಯಾನ್, ಉದ್ಯಮಿ ಕೆ. ಶ್ರೀಪತಿ ಭಟ್, ಮಾಜಿ ಸಚಿವ ಅಭಯಚಂದ್ರ ಜೈನ್, ಚೌಟರ ಅರಮನೆಯ ಕುಲದೀಪ ಚೌಟ, ಐಕಳ ಹರೀಶ್ ಶೆಟ್ಟಿ, ಸಂಗೀತ ನಿರ್ದೇಶಕ ವಿ. ಮನೋಹರ್, ಜಯಶ್ರೀ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು. ವೇಣುಗೋಪಾಲ ಶೆಟ್ಟಿ, ನಿತೇಶ್ ಮಾರ್ನಾಡು, ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ‘ಅಗ್ರಹಾರ ಕೃಷ್ಣಮೂರ್ತಿ’
    Next Article ಕಲಾವಿಲಾಸಿ ತಂಡದ ಕಲಾವಿದರಿಂದ ‘ಕ್ರಾಂತಿ ಬಂತು # ಕ್ರಾಂತಿ’ ನಾಟಕ ಪ್ರದರ್ಶನ | ನವೆಂಬರ್ 17
    roovari

    Add Comment Cancel Reply


    Related Posts

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂವಿಧಾನ ಸಾಥಿ’ ನೃತ್ಯ ಕಾರ್ಯಕ್ರಮಗಳ ಉದ್ಘಾಟನೆ | ಜೂನ್ 01

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಲೋಕಾರ್ಪಣೆಗೊಂಡ “ಯಕ್ಷ ರಜತ” ಸ್ಮರಣ ಸಂಚಿಕೆ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.