ಬೆಂಗಳೂರು : ಕನ್ನಡ ಜನಶಕ್ತಿ ಕೇಂದ್ರ ನೀಡುವ 2026ನೇ ಸಾಲಿನ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿಗೆ ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ರೂ.25 ಸಾವಿರ ನಗದು ಹಾಗೂ ಕಂಚಿನ ಫಲಕ ಒಳಗೊಂಡಿದೆ. 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಗೊ.ರು.ಚನ್ನಬಸಪ್ಪ ಇವರು, ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ದಿನಾಂಕ 02 ಜೂನ್ 2026ರಂದು ಸಂಜೆ ಗಂಟೆ 5-15ಕ್ಕೆ ಇಲ್ಲಿನ ಕನ್ನಡ ಭವನದಲ್ಲಿರುವ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಹಂಪ ನಾಗರಾಜಯ್ಯ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಆರ್.ಕೆ. ನಲ್ಲೂರು ಪ್ರಸಾದ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನನೂರು ಮತ್ತು ಮಾಜಿ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.
