ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ ವತಿಯಿಂದ ನಾಡೋಜ ಡಾ. ಚೆನ್ನವೀರ ಕಣವಿ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ದತ್ತಿ ಅಂಗವಾಗಿ ಆಯೋಜಿಸಿದ್ದ ಕನ್ನಡದ ಯುವ ಲೇಖಕರಿಗೆ ‘ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ’ ಮತ್ತು ‘ಶಾಂತಾದೇವಿ ಕಣವಿ ಕಥಾ ಸ್ಪರ್ಧೆ’ಯ ಬಹುಮಾನ ಪ್ರದಾನ ಸಮಾರಂಭವನ್ನು ದಿನಾಂಕ 28 ಜೂನ್ 2026ರಂದು ಮುಂಜಾನೆ 10-30 ಗಂಟೆಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಗು. ಬೆಲ್ಲದ ಇವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಹಿರಿಯ ಸಾಹಿತಿ ನಾಡೋಜ ಡಾ. ಕುಂ. ವೀರ ಭದ್ರಪ್ಪ ಇವರು ‘ಕಣವಿ ದಂಪತಿಗಳು’ ಮತ್ತು ಧಾರವಾಡದ ಸಾಹಿತಿ ಡಾ. ಜಿ.ಎಂ. ಹೆಗಡೆ ಇವರು ‘ಕಣವಿ ಶಿವರುದ್ರಪ್ಪ ಅವರ ಸ್ನೇಹ ಕಾರ್ತೀಕ’ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಹಿರಿಯ ಸಂಗೀತಗಾರರಾದ ಡಾ. ಸುಮಿತ್ರಾ ಕಾಡದೇವರಮಠ ಇವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.


