ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ದಿನಾಂಕ 12 ಆಗಸ್ಟ್ 2026ರಂದು ರಂಗನಾಥನ್ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಎಂ.ಜಿ.ಎಂ. ಕಾಲೇಜಿನ ಗ್ರಂಥಪಾಲಕರಾದ ಕಿಶೋರ್ ಕುಮಾರ್ “ನವಭಾರತದ ಗ್ರಂಥಾಲಯದ ಪರಿಕಲ್ಪನೆಗೆ ಹೊಸದಿಕ್ಕನ್ನು ಕಲ್ಪಿಸಿಕೊಟ್ಟ ಕೀರ್ತಿ ಡಾ. ಎಸ್.ಆರ್. ರಂಗನಾಥನ್ ಅವರಿಗೆ ಸಲ್ಲುತ್ತದೆ. ಅವರು ಮೂಲತ: ಗಣಿತ ಶಾಸ್ತ್ರದ ಪ್ರಾಧ್ಯಾಪಕರು. ಅವರ ಅದಮ್ಯವಾದ ಪುಸ್ತಕ ಪ್ರೀತಿ ಅವರನ್ನು (ಭಾರತದ ಗ್ರಂಥಾಲಯ ವಿಜ್ಞಾನ) ಗ್ರಂಥಾಲಯ ವಿಜ್ಞಾನದ ಪಿತಾಮಹನನ್ನಾಗಿ ರೂಪಿಸಿದೆ. ಅವರು ಅಂದು ರೂಪಿಸಿದ ವ್ಯವಸ್ಥೆಯಿಂದಾಗಿ ಶಾಲಾ ಕಾಲೇಜುಗಳಲ್ಲಿ, ಸಂಶೋಧನಾ ಕೇಂದ್ರಗಳಲ್ಲಿ ಗ್ರಂಥಾಲಯ ಆಧುನಿಕ ವ್ಯವಸ್ಥೆಯೊಂದಿಗೆ ಪರಿವರ್ತನೆಗೊಂಡಿದೆ. ಡಾ. ಎಸ್.ಆರ್. ರಂಗನಾಥನ್ ಅವರು 12 ಅಗೋಸ್ಟ್ 1892ರಲ್ಲಿ ಜನಿಸಿದರು. ಅವರ ಕೊಡುಗೆಗಳೆಂದರೆ ಗ್ರಂಥಾಲಯದ ಪಂಚಸೂತ್ರಗಳು ಮತ್ತು ಕೊಲೊನ್ ವರ್ಗೀಕರಣ. ಗ್ರಂಥಾಲಯದ ಬಗ್ಗೆ ಮಾಡಿದ ಸಾಧನೆ, ನೀಡಿದ ಕೊಡುಗೆ ಹಾಗೂ ಅವರ ಸೇವೆಗಾಗಿ ಅವರನ್ನು ಗ್ರಂಥಾಲಯದ ಪಿತಾಮಹ ಎಂದು ಕರೆಯುತ್ತಾರೆ. ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಆಗಿ ಆಚರಿಸಲಾಗುತ್ತದೆ” ಎಂದರು.
ಎಂ.ಜಿ.ಎಂ. ಕಾಲೇಜಿನ ಗಾಂಧಿಯನ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಶ್ರೀ ವಿನಿತ್ ರಾವ್, ಆರ್.ಆರ್.ಸಿ. ಸಹ ಸಂಶೋಧಕ ಡಾ. ಎಸ್.ಆರ್. ಅರುಣ್ಕುಮಾರ್ ಉಪಸ್ಥಿತರಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.
