ಮೂಡುಬಿದಿರೆ : ಕಳೆದ ನಲುವತ್ತೈದು ವರುಷಗಳಿಂದ ಪ್ರತಿಷ್ಠಿತ ವರ್ಧಮಾನ ಸಾಹಿತ್ಯ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠವು 2025ರ ಸಾಲಿನ ಪ್ರಶಸ್ತಿಗಳನ್ನು ನಿರ್ಣಯಿಸಿದ್ದು ಹಿರಿಯ ಸಾಹಿತಿ ಡಾ. ಪಾದೇಕಲ್ಲು ವಿಷ್ಣು ಭಟ್ ಇವರಿಗೆ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ ಮತ್ತು ಶ್ರೀ ಟಿ.ಎ.ಎನ್. ಖಂಡಿಗೆ ಇವರಿಗೆ ‘ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ’ಯನ್ನು ಘೋಷಿಸಿದೆ.
‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ಯು ರೂಪಾಯಿ ಇಪ್ಪತ್ತೈದು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದರೆ ‘ವರ್ಧಮಾನ ಉದಯೋನ್ಮುಖ ಪ್ರಶಸ್ತಿ’ಯು ರೂಪಾಯಿ ಹದಿನೈದು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರದ ಜೊತೆ ಸನ್ಮಾನವನ್ನೂ ಒಳಗೊಂಡಿವೆ.
ಮೂಡುಬಿದಿರೆಯಲ್ಲಿ ದಿನಾಂಕ 20 ಜೂನ್ 2026ರ ಶನಿವಾರ ವರ್ಧಮಾನ ಪ್ರಶಸ್ತಿ ಪೀಠದ ಮಹಾಸಭೆಯು ಪೀಠದ ಅಧ್ಯಕ್ಷರಾದ ಶ್ರೀ ಎಸ್.ಡಿ. ಸಂಪತ್ ಸಾಮ್ರಾಜ್ಯ ಇವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಈ ಸಾಲಿನ ತೀರ್ಪುಗಾರರಾದ ವಿಮರ್ಶಕ ಡಾ. ಬಿ. ಜನಾರ್ದನ ಭಟ್, ಪ್ರಾಧ್ಯಾಪಕ ಪ್ರೊ. ಬಿ.ಪಿ. ಸಂಪತ್ ಕುಮಾರ್ ಮತ್ತು ವಿಮರ್ಶಕ ಬೆಳಗೋಡು ರಮೇಶ ಭಟ್ ಇವರುಗಳುಳ್ಳ ತ್ರಿಸದಸ್ಯ ಸಮಿತಿಯು ನೀಡಿದ ಶಿಫಾರಸ್ಸಿನ ಆಧಾರದಲ್ಲಿ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ. ಮೂಡುಬಿದಿರೆಯ ಸಮಾಜಮಂದಿರ ಸಭಾದಲ್ಲಿ ಸಪ್ಟಂಬರ್ ತಿಂಗಳಲ್ಲಿ ನಡೆಸುವ ದಸರಾ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ. ನಾ. ಮೊಗಸಾಲೆ ತಿಳಿಸಿದ್ದಾರೆ.
