ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ (ಮಾಹೆ), ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಮಾಹೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಇವರ ಜಂಟಿ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಧನ ಸಹಾಯದೊಂದಿಗೆ ‘ವೀರ ವೃಷಸೇನ’ ಯಕ್ಷಗಾನ ದಾಖಲೀಕರಣವು ದಿನಾಂಕ 05 ಜುಲೈ 2026ರಂದು ಎಂ.ಜಿ.ಎಂ. ಕಾಲೇಜು ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸಲಹೆಗಾರರು ಹಾಗೂ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇದರ ಕಾರ್ಯದರ್ಶಿಗಳೂ ಆದ ಡಾ. ನಾರಾಯಣ ಸಭಾಹಿತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಯಕ್ಷಗಾನ ಕಾಲಕಾಲಕ್ಕೆ ಬದಲಾವಣೆಯನ್ನು ಕಾಣುತ್ತಾ ಬಂದಿದೆ. ಹಿಂದಿನ ಕಲಾವಿದರ ಪರಂಪರೆಯ ವೇಷಗಳು ಇಂದು ಕಣ್ಮರೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಈ ದಾಖಲೀಕರಣ ಹೆಚ್ಚಿನ ಮಹತ್ವವನ್ನು ಪಡೆಯುತ್ತದೆ. ಇದು ಮುಂದಿನ ಕಲಾವಿದರಿಗೆ ಸಹಾಯ ಬೇಕೆನ್ನುವ ನಿಟ್ಟಿನಲ್ಲಿ ಹಾಗೂ ಅದನ್ನು ರಂಗದಲ್ಲಿ ಅಳವಡಿಸಿಕೊಂಡು ಯಕ್ಷಗಾನ ಕಲೆಯ ಮೂಲ ಸತ್ವ ಸ್ವರೂಪವನ್ನು ಇಂದಿನವರಿಗೂ ತಲುಪಿಸುವ ಕೆಲಸವನ್ನು ಮಾಡಲಿ. ಹಿಂದಿನ ಕಲಾವಿದರು ಸನ್ನಿವೇಶವನ್ನು ರಂಗದ ಮೇಲೆ ಕಟ್ಟುತ್ತಿದ್ದ ರೀತಿ ಅನನ್ಯವಾದುದು. ಹಳೆಯದು ಯಾವಾಗಲೂ ಅಮೂಲಯವಾದದ್ದು, ಅದನ್ನು ಉಳಿಸಿಕೊಂಡು ಬೆಳೆಸಿಕೊಂಡು ಬರಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ಯಕ್ಷಗಾನ ಕೇಂದ್ರ ಇಂತಹ ಪ್ರಯತ್ನವನ್ನು ಮಾಡುತ್ತಿರುವುದು ಶ್ಲಾಘನೀಯ” ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇಲ್ಲಿಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ “ನಮ್ಮ ಸಾಹಿತ್ಯ, ಕಲೆ, ಸಂಸ್ಕೃತಿ ಅತ್ಯಂತ ಮಹತ್ವವಾದದ್ದು, ಅದರಲ್ಲೂ ಶುದ್ಧ ಕನ್ನಡ ಬಳಕೆಯ ಯಕ್ಷಗಾನ ಕಲೆಯಿಂದಲೂ ಕನ್ನಡ ಭಾಷೆ ಉಳಿಯಲು ಸಾಧ್ಯ. ಇಂತಹ ದಾಖಲೀಕರಣದ ಮೂಲಕ ಹೊಸ ತಲೆಮಾರಿಗೆ ಪರಂಪರೆಯ ಯಕ್ಷಗಾನವನ್ನು ತಲುಪಿಸುವ ಕೆಲಸವನ್ನು ಮಾಡಬೇಕು” ಎಂದರು.
ಡಾ. ಜಗದೀಶ್ ಶೆಟ್ಟಿ ಸಿದ್ಧಾಪುರ, ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ಶ್ರೀ ವಿಶ್ವನಾಥ ಶೆಣೈ, ಶ್ರೀಮತಿ ಮೀನಲಕ್ಷಿಣಿ ಅಡ್ಯಂತಾಯ, ಶ್ರೀ ವಿ.ಜಿ. ಶೆಟ್ಟಿ, ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆಯನ್ನು ವಹಿಸಿದರು. ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಸ್ವಾಗತಿಸಿ, ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯ, ಕಾರ್ಯಕ್ರಮದ ಸಂಯೋಜಕ ಪ್ರೊ. ಎಸ್.ವಿ. ಉದಯ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಮೇಶ್ ಸುವರ್ಣ ಪ್ರಾರ್ಥಿಸಿ, ಎಂ.ಜಿ.ಎಂ. ಕಾಲೇಜಿನ ಕನ್ನಡ ಪ್ರಾಧ್ಯಾಪಕ ಶ್ರೀ ರಾಘವೇಂದ್ರ ತುಂಗ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
