ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ಇವರು ಸ್ಥಾಪಿಸಿರುವ ಪ್ರತಿಷ್ಠಿತ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ದತ್ತಿ ಪ್ರಶಸ್ತಿಗೆ 2025 ಮತ್ತು 2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. 2025ನೇ ಸಾಲಿನ ಪ್ರಶಸ್ತಿಗೆ ಬೆಂಗಳೂರಿನ ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ ಹಾಗೂ ಹಿರಿಯ ಸಾಹಿತಿ ಡಾ. ಲತಾ ಗುತ್ತಿ ಆಯ್ಕೆಯಾಗಿದ್ದಾರೆ. 2026ನೇ ಸಾಲಿನ ಪ್ರಶಸ್ತಿಗೆ ಬಾಗಲಕೋಟೆಯ ಹಿರಿಯ ಸಾಹಿತಿ ಡಾ. ಶ್ರೀರಾಮ ಇಟ್ಟಣ್ಣವರ ಹಾಗೂ ಬೆಂಗಳೂರಿನ ಹಿರಿಯ ಲೇಖಕಿ ಡಾ. ಪದ್ಮನಿ ನಾಗರಾಜು ಆಯ್ಕೆಯಾಗಿದ್ದಾರೆ.
ಕನ್ನಡ ನಾಡು-ನುಡಿ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ, 60 ವರ್ಷ ಪೂರೈಸಿದ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಗೆ ಪ್ರತಿವರ್ಷ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿಯು ತಲಾ 30 ಸಾವಿರ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ನಾಡೋಜ ಡಾ. ಮನು ಬಳಿಗಾರ್ ಇವರು ತಮಗೆ ಮಾಸಿಕವಾಗಿ ದೊರೆಯುವ ಗೌರವ ಸಂಭಾವನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿಯಾಗಿ ಸ್ಥಾಪಿಸಿ, ಅದರ ಮೂಲಕ ಈ ಪ್ರಶಸ್ತಿಯನ್ನು ನೀಡುವ ವ್ಯವಸ್ಥೆ ಮಾಡಿದ್ದಾರೆ. 2021ರಿಂದ ಈ ಗೌರವ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ. ದಯಾನಂದ ಇವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ 2025 ಹಾಗೂ 2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
